ನಮಸ್ಕಾರ ಎಲ್ಲಾ ಓದುಗರಿಗೆ :) ನನ್ನ ಬ್ಲಾಗಿಗೆ ಬಂದದ್ದಕ್ಕೆ ನಿಮಗೆ ಧನ್ಯವಾದಗಳು... ನಾನು ಇಲ್ಲಿ ಬರೆದಿರೋದು ಹೇಗಿದೆ ? ನಿಮಗೆ ಇಷ್ಟಾ ಆಯ್ತಾ ? :) ಇಲ್ವಾ ? :( ಏನಾದ್ರೂ ಪರ್ವಾಗಿಲ್ಲ, ಒಂದು ನಿಮಿಷ ನಿಮ್ಮ ಅನಿಸಿಕೆ ಬರೆದುಹೋಗಬೇಕಾಗಿ ವಿನಂತಿ. ನಿಮ್ಮ ಅನಿಸಿಕೆಗಳೇ ಇಲ್ಲಿನ ಬರಹಕ್ಕೆ ಸ್ಪೂರ್ತಿ....
Showing posts with label ಚಾರಣ-ಪ್ರವಾಸ. Show all posts
Showing posts with label ಚಾರಣ-ಪ್ರವಾಸ. Show all posts

Wednesday, October 7, 2009

ಮುಳ್ಳಯ್ಯನ ಗಿರಿ-ಕೆಮ್ಮಣ್ಣುಗುಂಡಿ ಚಾರಣ

ನವೆಂಬರ್ ೨೯,೩೦ ೨೦೦೮

ದಿನಪೂರ್ತಿ ಕಂಪ್ಯೂಟರಿನ ಮುಂದೆ ಕೆಲ್ಸಮಾಡಿ, ಮನೆಗೆ ಹೋಗಿ ಮನೆಲೂ ಕೆಲ್ಸ ಮಾಡಿ ಸಕತ್ ಬೇಜಾರಾಗೋಗಿತ್ತು. ಇದರ ನಡುವೆ ಒಂದು ಪುಟ್ಟ Break ಬೇಕಾಗಿತ್ತು. ಯಾವರೀತಿ Timepass ಮಾಡಿದ್ರೆ ಚೆನ್ನಾ ಅಂತ ಲೆಕ್ಕಾಚಾರ ಹಾಕ್ತಾ ಇರೋಹಾಗೇ ಮನೋಹರ ನಂಗೆ call ಮಾಡಿದ್ದ. ಒಂದು Trekking ಇದೆ, ಬರ್ತೀಯಾ ? ಬರೋಹಾಗಿದ್ರೆ ನನ್ನ Accountಗೆ ದುಡ್ಡು Transfer ಮಾಡ್ಬಿಡು ಅಂದ. ನಿಸರ್ಗದ ನಡುವೆ ಇರೋ ಅವಕಾಶ ತಾನಾಗೇ ಸಿಕ್ಕಿರೋವಾಗ ತಡಮಾಡದೇ ಮನೋಹರನಿಗೆ ಈ ಚಾರಣದ ವಿಷಯ ತಿಳಿಸಿದ್ದಕ್ಕೆ ಮನದಲ್ಲೇ Thanks ಹೇಳ್ತಾ ಚಾರಣಕ್ಕೆ ಬೇಕಾಗುವ ಮೊತ್ತವನ್ನ ಮುಂಗಡವಾಗಿ ಇಂಟರ್ನೆಟ್ಟಿನಿಂದ ಸುಲಭವಾಗಿ ಮನೋಹರನ ಖಾತೆಗೆ ಜಮಾ ಮಾಡಿ ನಾನು ಚಾರಣಕ್ಕೆ ಬರುವುದನ್ನ ಖಾತ್ರಿ ಪಡಿಸಿಕೊಂಡೆ.

ಮನೋಹರ್ ಮತ್ತೆ ಹರ್ಷ ಗುಂಪಿನೊಡನೆ ಇದು ನನ್ನ ಎರಡನೇ ಚಾರಣ. ಚಾರಣಕ್ಕೆ ಹೋಗಬೇಕಾಗಿದ್ದ ಜಾಗ "ಮುಳ್ಳಯ್ಯನ ಗಿರಿ", ಅಲ್ಲಿಂದ ನಾವು ಕೆಮ್ಮಣ್ಣುಗುಂಡಿಗೆ ಬಂದು ನಮ್ಮ ಚಾರಣವನ್ನ ಅಂತ್ಯಗೊಳಿಸೋದು ಅಂತ ಅವರಿಬ್ಬರೂ Plan ಮಾಡಿದ್ರು.

ಮೊದಲಿಗೇ ಚಾರಣದ ಸಿದ್ದತೆಯನ್ನು ಮಾಡಿಕೊಂಡಿದ್ದವರು ನಮ್ಮ ಗುಂಪಿನ ನಾಯಕರಾದ ಹರ್ಷ ಮತ್ತು ಮನೋಹರ. ಚಾರಣದ ಆಸಕ್ತಿ ಇರೋ ೧೧ ಚಾರಣಿಗರನ್ನ ಒಟ್ಟುಸೇರಿಸಿ, ಅವರಿಂದ ಮುಂಗಡ ಹಣ ಪಡೆದು KSRTC ಯಲ್ಲಿ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಮುಂಗಡ ಟಿಕೇಟ್ ಖರೀದಿ ಮಾಡಿ, ಬೀರೂರಿನಿಂದ ಬೆಂಗಳೂರಿಗೆ Return Journey ಯನ್ನ ಕಾದಿರಿಸಿದ್ರು. ನಾನು ಸಾಮಾನ್ಯವಾಗಿ ಚಾರಣಕ್ಕೆ ಹೋಗುವಾಗೆಲ್ಲಾ ನಮ್ಮ ಊಟ ಕಾಡಿನಲ್ಲೇ ತಯಾರಾಗುತ್ತಿತ್ತು. ಆದರೆ ಇಲ್ಲಿ ಅದು ಸ್ವಲ್ಪ ಬದಲಾಗಿತ್ತು. ಕಾಡಿನಲ್ಲಿ ಅಡುಗೆ ಮಾಡಿ ಊಟಮಾಡುವಬದಲಿಗೆ MTRನ Ready To Eat Packetsನ ತಂದಿದ್ದರು. ಅದರ ಜೊತೆಯಲ್ಲಿ ಕಾಡಿನಲ್ಲಿ Campingಗೆ ಬೇಕಾಗುವ Tent ಮತ್ತೆ sleeping bag ಗಳು, Tentನ ಒಳಗೆ ಹಾಸಲು ಬೇಕಾಗುವ Matಗಳ ಪೂರ್ವ ಸಿದ್ದತೆ ಆಗಿತ್ತು. ಈ ಸಲದ ಚಾರಣದಲ್ಲಿ ನನಗೆ ಹೊಸದೆನಿಸಿದ್ದು ಹರ್ಷ ತಂದಿದ್ದ GPS. ಅದರಲ್ಲಿ Google earth ನಿಂದ ಮೊದಲೇ ನಾವು ಚಾರಣ ಮಾಡುವ ಮಾರ್ಗವನ್ನ ಸಿದ್ಧಪಡಿಸಿ ತಂದಿದ್ದರು, ಅದಿಲ್ಲದಿದ್ದಲ್ಲಿ ದಟ್ಟವಾಗಿ ಮಂಜು ಕವಿದಿದ್ದರಿಂದ ನಮಗೆ ಚಾರಣ ಮಾಡಲು ದಿಕ್ಕು ದಾರಿ ತಿಳಿಯುತ್ತಿರಲಿಲ್ಲ.

ಚಾರಣಿಗರ ಪಟ್ಟಿ ಇಂತಿದೆ:


Harsha
Manohar D.C ಅವರ ಇನ್ನೊಂದು ಹೆಸರು Manu
Vishwanath ಅವರ ಇನ್ನೊಂದು ಹೆಸರು Choodi
Anees K.A
Santhosh
Dilip
Linson Jose ಅವರ ಇನ್ನೊಂದು ಹೆಸರು Linsa
Arun Sadasivan ಅವರ ಇನ್ನೊಂದು ಹೆಸರು Sadasiva
Praveen ಅವರ ಇನ್ನೊಂದು ಹೆಸರು SNMP
Joephin


ಶನಿವಾರ: ಚಿಕ್ಕಮಗಳೂರು-ಮುಳ್ಳಯ್ಯನ ಗಿರಿ-ಬಾಬಾ ಬುಡನ್ ಗಿರಿ-ಗಾಳಿಕೆರೆ ಚಾರಣ

ಶುಕ್ರವಾರ ರಾತ್ರಿ ನಾವೆಲ್ಲಾ ಬೆಂಗಳೂರಿನಿಂದ ವೋಲ್ವೋ ಬಸ್ಸಿನಲ್ಲಿ ಹೊರಟು ಶನಿವಾರ ಬೆಳಗಿನಜಾವ ಸುಮಾರು ೪:೩೦ಕ್ಕೆ ನಮ್ಮ ಐರಾವತದಲ್ಲಿ ಚಿಕ್ಕಮಗಳೂರಿಗೆ ಬಂದು ತಲುಪಿದೆವು. ಬೆಳ್ಳಂಬೆಳಿಗ್ಗೆ ಆ ಚುಮು ಚುಮು ಚಳಿಯಲ್ಲಿ ಎಲ್ಲಾ ಐರಾವತದಿಂದ ಧರೆಗಿಳಿದೆವು :D . ಇಳಿಯುತ್ತಿದ್ದಂತೇ ಎಲ್ಲರ ಕಣ್ಣೂ ಹುಡುಕಿದ್ದು ಟೀ ಅಂಗಡಿಯನ್ನ. ನಾವೆಲ್ಲಾ ಬಿಸಿ ಬಿಸಿ ಟೀ ಆಸ್ವಾಧಿಸುತ್ತಿದ್ದರೆ ಹರ್ಷ ಮತ್ತೆ ವಿಶ್ವನಾಥ್ ನಮಗಾಗಿ Lodge ವ್ಯವಸ್ಥೆ ಮಾಡಲು ಹೋಗಿದ್ದರು. ಒಟ್ಟಿಗೇ ಅಷ್ಟುಜನ ಬಸ್ಸಿನಿಂದ ಇಳಿದದ್ದನ್ನು ನೋಡಿದ Wollen Cap ಮಾರುವವನು ತನ್ನ ಅಂಗಡಿಯನ್ನೇ ನಾವು ನಿಂತಿದ್ದ ಸ್ಥಳಕ್ಕೆ ತಂದಿದ್ದ. ನಮ್ಮಲ್ಲಿ ಕೆಲವರು ಅವನಿಂದ Cap ಖರೀದಿಸಿದ ನಂತರ ಹರ್ಷ ಅವರು Book ಮಾಡಿದ್ದ Lodgeನತ್ತ ಪಯಣ ಬೆಳೆಸಿದ್ವಿ.


ಹರ್ಷ ಮತ್ತೆ ವಿಶ್ವನಾಥ್ ಬಹಳಹೊತ್ತು ಹುಡುಕಿದ ನಂತರ Naveen-Lodge ಎಂಬಲ್ಲಿ ನಮಗೆ ಕೊಠಡಿಯ ವ್ಯವಸ್ಥೆಯಾಯಿತು. ಬೆಳಗಿನ ಕಾರ್ಯಕ್ರಮಗಳನ್ನು ಮುಗಿಸಿದ ನಂತರ ಹತ್ತಿರದಲ್ಲೇ ಇದ್ದ ಹೊಟೇಲ್ ಒಂದರಲ್ಲಿ ಇಡ್ಲಿ, ವಡೆ ತಿಂಡಿ ತಿಂದು ಸುಮಾರು ೭:೪೫ ಕ್ಕೆ ಅಲ್ಲಿಯೇ ಒಂದು ಜೀಪು ಮತ್ತೊಂದು ಮಾರುತಿ ಆಮ್ನಿ ಯನ್ನ ಬಾಡಿಗೆ ಪಡೆದು ಸುಮಾರು ೧೫ ಕಿ.ಮೀ ದೂರದ ನಮ್ಮ ಚಾರಣ ಪ್ರಾರಂಭವಾಗುವ ಸ್ಥಳಕ್ಕೆ ೮:೩೦ ರ ಹೊತ್ತಿಗೆ ಎಲ್ಲಾ ಚಾರಣಿಗರು ಬಂದಿಳಿದೆವು.


ಆ ಎರಡೂ ವಾಹನಗಳಿಗೆ ೬೦೦ ರೂಪಾಯಿ ಹಣ ನೀಡಿ, ಮೊದಲೇ ಚಿಕ್ಕಮಗಳೂರಿನ ಕಾಮತ್ ಹೋಟೇಲಿನಿಂದ ಕಟ್ಟಿಸಿಕೊಂಡು ಬಂದಿದ್ದ ತಿಂಡಿಯ ಪೊಟ್ಟಣಗಳನ್ನ (೨ ಚಪಾತಿ + ಖಾರಾ ಭಾತ್) ಪ್ರತಿಯೊಬ್ಬರು ಪಡೆದು, ನಮ್ಮ ಕಾಲಿಗೆ ಜಿಗಣೆಗಳು ಹತ್ತದಂತೆ ಮನೋಹರ ತಂದಿದ್ದ Body sprayಯನ್ನ ಹಾಕಿಸಿಕೊಂಡು ಚಾರಣದ ಹಾದಿಯಲ್ಲಿ ನಡೆದೆವು.


ಈ ಸ್ಥಳಕ್ಕೆ ಸರ್ಪಹಾದಿ ಎಂದು ಹೆಸರು. ಇಲ್ಲಿಂದಲೇ ನಮ್ಮ ಚಾರಣದ ಆರಂಭ. ಚಾರಣದ ಹಾದಿ ಹಾವಿನ ಮಾದರಿಯಲ್ಲಿ ಇದ್ದದ್ದರಿಂದಲೇ ಆ ಹೆಸರು ಬಂದಿರಬೇಕು. ನಮ್ಮ ಹಾದಿ ಸರ್ಪಹಾದಿಯ ಕಮಾನಿನಿಂದ ಪ್ರಾರಂಭವಾಯ್ತು. ಹಾದಿ ಸ್ವಲ್ಪ ಕಡಿದಾಗಿದ್ದರೂ ಬಹಳ ಕಠಿಣವಾಗಿರಲಿಲ್ಲ. ಪಕ್ಕಾ ಹಾವಿನ ಹಾದಿಯಂತೆ Zig-zag ಆಗಿತ್ತು. ಹಾದಿಬದಿಯಲ್ಲಿ ಹಲವಾರು ಪದರಗಳೊಳಗೊಂಡ ಬಂಡೆಗಲ್ಲುಗಳು ಸುಂದರವಾಗಿದ್ದವು. ಚಾರಣದ ಆರಂಭದಲ್ಲಿ ಸಾಧಾರಣ ಕ್ಯಾಮರಾ ತಂದಿದ್ದ ನನಗೆ ನಮ್ಮನ್ನ ಸುತ್ತುವರೆದಿದ್ದ ಮಂಜಿನಿಂದ ಹೆಚ್ಚು Photoಗಳನ್ನ ತೆಗೆಯಲಾಗಲಿಲ್ಲ :(


ಚಾರಣದ ಪ್ರಾರಂಭದಿಂದ ಅಂತ್ಯದವರೆಗೂ ನಮ್ಮೊಡನೆ "ನಿಷ" ಇದ್ದದ್ದು ಒಂದುರೀತಿಯಲ್ಲಿ ಸಂತಸದ ವಿಷಯವಾದರೂ ಮತ್ತೊಂದೆಡೆ ಬೇಸರ ತರಿಸಿತ್ತು. ಅಂದಹಾಗೆ ಈ "ನಿಷ" ಯಾರೆಂದು ಕುತೂಹಲವಿದ್ದಲ್ಲಿ ಹೇಳಿಬಿಡುತ್ತೇನೆ. ೨೦೦೮ರ ನವೆಂಬರಿನ ಕೊನೆಯವಾರದಲ್ಲಿ ತಮಿಳುನಾಡಿಗೆ ಅಪ್ಪಳಿಸಿದ್ದ ಚಂಡಮಾರುತದ ಹೆಸರೇ "ನಿಷ" ಇದರಿಂದ ನಮಗಾದ ಉಪಯೋಗ ಅಂದರೆ ಚಾರಣದಲ್ಲಿ ಎಲ್ಲಿಯೂ ನಾವು ಬಿಸಿಲಿನ ತಾಪದಿಂದ ಬಳಲಲಿಲ್ಲ ಆದ್ದರಿಂದ ಸಂತಸ :). ಬೇಸರದ ವಿಷಯ ಎಂದರೆ ನಿಸರ್ಗದ ಸೊಬಗನ್ನು ನಮ್ಮ ಕ್ಯಾಮರಾ ಕಣ್ಣಿನಲ್ಲಿ ಸೆರೆಹಿಡಿಯಲಾಗಲಿಲ್ಲ ಎಂಬುದು :|. ಚಂಡಮಾರುತದ ಪ್ರಭಾವ ಎಷ್ಟಿತ್ತೆಂದರೆ ದಟ್ಟವಾದ ಮಂಜು ನಮ್ಮ ದೃಷ್ಟಿ ೧೦ಮೀಟರ್ ಮೀರಿ ಹೋಗದಂತೆ ತಡೆ ಹಿಡಿದಿತ್ತು. ನನ್ನ ಹಿಂದಿನ ಕೆಲವು ಚಾರಣದಲ್ಲಿ ವರುಣನ ಜೊತೆಯಾದರೆ ಇಲ್ಲಿ ಮಂಜಿನ ಜೊತೆಗೇ ನಮ್ಮ ಚಾರಣ ಮುಂದುವರೆದಿತ್ತು.


ನಮ್ಮಂತೆಯೇ ಹಲವು ಚಾರಣಿಗರು ಇಲ್ಲಿ ಆಗಾಗ ಬರುವುದುಂಟು, ಹಾಗಾಗಿ ಕಾಲುದಾರಿ ನಮಗೆ ಸ್ಪಷ್ಟವಾಗೇ ಕಾಣುತ್ತದೆ. ಇದು ಆರಂಭದ ಹಂತ ಮಾತ್ರ. ಮಂಜಿನ ಕಾರಣದಿಂದ ನಮಗೆ ಬೆಟ್ಟದಮೇಲಿನ ದೊಡ್ಡ ಬಂಡೆ ಕಾಣಲಿಲ್ಲ, ಸೂರ್ಯನ ಬೆಳಕಿದ್ದಲ್ಲಿ ಅದು ಗೊಚರಿಸುತ್ತದೆ ಎಂದು ಹರ್ಷನಿಂದ ತಿಳಿದುಬಂತು. ಹಾದಿಯುದ್ದಕ್ಕೂ ಹುಲ್ಲು ಹಾಸಿನ ಮೇಲೆ ಮಂಜಿನ ಹನಿಗಳು ಮುತ್ತಿನ ಮಾಲೆಯಂತೆ ಕಾಣಿಸುತ್ತಿತ್ತು. ಸಾಧ್ಯವಾದಷ್ಟೂ ಅವುಗಳನ್ನ ನನ್ನ ಕ್ಯಾಮರದಲ್ಲಿ ಸೆರೆ ಹಿಡಿದೆ. ಮಾರ್ಗಮಧ್ಯದಲ್ಲಿ ಸ್ವಲ್ಪ ಹಾದಿ ತಪ್ಪಿ ಬೇರೆ ಹಾದಿ ಹಿಡಿದು ಹೊರಟಿದ್ದೆವು, ನಂತರ ಮರಳಿ ಸರಿಯಾದ ದಾರಿಯಲ್ಲಿ ನಮ್ಮ ಪಯಣ ಮುಂದುವರೆಯಿತು.





ಅಂದಾಜು ಅರ್ಧ ದಾರಿಯಾದಮೇಲೆ ಒಂದು ನಂದಿಯ ವಿಗ್ರಹವನ್ನು ಕಾಣಬಹುದು. ಸೂರ್ಯನ ಬೆಳಕಿದ್ದಲ್ಲಿ ಇಲ್ಲಿಂದಲೇ ದೇವಸ್ಥಾನದ ಗೋಪುರವನ್ನ ನೋಡಬಹುದಂತೆ. ಅಲ್ಲಿಂದ ಸುಮಾರು ೧೦-೧೫ ನಿಮಿಷಗಳ ಚಾರಣದ ನಂತರ ನಮಗೆ ಒಂದು ಗುಹೆ ಕಾಣಿಸಿತು.


ನಮ್ಮಲ್ಲಿ ಕೆಲವರು ಆಲ್ಲಿಗೆ ಹೋಗಿ ಅದರ ಒಳಹೊಕ್ಕು ಕೆಲವು Photoಗಳನ್ನ ಕ್ಲಿಕ್ಕಿಸಿ ಮತ್ತೆ ದೇವಸ್ಥಾನದ ದಾರಿ ಹಿಡಿದೆವು. ದೇವಸ್ಥಾನ ತಲುಪುವ ಹೊತ್ತಿಗೆ ಸಮಯ ಅಂದಾಜು ೧೦:೧೫ ಆಗಿತ್ತು.



ಮೊದಲಿದ್ದ ದೇವಸ್ಥಾನವನ್ನ "ಜೀರ್ಣೊದ್ಧಾರ" ಮಾಡುತ್ತಿದ್ದರು, ಹಾಗಾಗಿ ಅಲ್ಲಿ ಹಲವು ಕಾರ್ಮಿಕರು ಮತ್ತು ಹತ್ತಿರದ ಹಳ್ಳಿಗಳಿಂದ ಬಂದಿದ್ದ ಭಕ್ತಾದಿಗಳು ಇದ್ದರು. ನಮ್ಮನ್ನೆಲ್ಲಾ ನೋಡಿ ಮಂಜಿನ ನಡುವೆ ನಮ್ಮ ಚಾರಣಮಾಡುವ ಉತ್ಸಾಹ ಕಂಡು ಅಚ್ಚರಿ ಪಟ್ಟರು. ಅಲ್ಲಿಯ ಪ್ರಧಾನ ಅರ್ಚಕರಿಂದ ನೆನ್ನೆ ಬಾಬಾಬುಡನ್ ಗಿರಿ ಮತ್ತು ಸುತ್ತಲ ಪ್ರದೇಶಗಳಲ್ಲಿ ಧರಾಕಾರವಾಗಿ ಮಳೆಯಾಗಿ ಮಣ್ಣು ಕುಸಿದಿರುವುದು ತಿಳಿದುಬಂತು. ಅಲ್ಲಿಯೇ ಸ್ವಲ್ಪ ಹೊತ್ತು ಕೂತಿದ್ದು ಅರ್ಚಕರ ಮನೆಯಲ್ಲಿ ನಾವು ಕೊಂಡೊಯ್ದಿದ್ದ ಹಾಲನ್ನು ಅವರಿಗೆ ನೀಡಿ ಅವರಿಂದ ಕಾಫೀ ಮಾಡಿಸಿಕೊಂಡು ಕುಡಿದು ಅವರು ಸಾಕಿದ್ದ ಬೆಕ್ಕಿನ Photoಗಳನ್ನ ಸೆರೆ ಹಿಡಿದು ಪರ್ವತದಂಚಿನ ಕಡೆಗೆ (Ridge) ನಮ್ಮ ಪಯಣಬೆಳೆಸಿದೆವು.





ನಾವು ಮುಳ್ಳಯ್ಯನ ಗಿರಿಯಿಂದ ಬಾಬಾ ಬುಡನ್ ಗಿರಿಯನ್ನು ತಲುಪಲು ಪರ್ವತಗಳ ಅಂಚಿನಲ್ಲೇ ಸಾಗಬೇಕಿತ್ತು.




ಆ ದಟ್ಟವಾಗಿ ಕವಿದಿದ್ದ ಮಂಜಿನ ನಡುವೆ GPSನ ಸಹಾಯದಿಂದ ಸರಿಯಾದ ದಾರಿಯಲ್ಲೇ ಹೋಗುತ್ತಿದ್ದೆವು. ನಮ್ಮ ಸಧ್ಯದ ಗುರಿಯಿದ್ದದ್ದು ನಮ್ಮ Lunch point ನೆಡೆಗೆ. ನಾವು ದೇವಸ್ಥಾನದಿಂದ ಹೊರಟಾಗ ಅಂದಾಜು ೧೧:೧೫ ರ ಸಮಯ. ನಮ್ಮ Lunch point ತಲುಪಲು ನಾವು ಪರ್ವತದಿಂದ ಇಳಿದು ಮತ್ತೆ ನಮ್ಮ ಊಟದ ಕಾರ್ಯಕ್ರಮವನ್ನ ಮುಗಿಸಿ ಮುಂದೆ ಸಾಗಬೇಕಿತ್ತು. ಇಂತಹಾ ಸ್ಥಳಗಳಲ್ಲಿ ಸಂಜೆಯ ಹೊತ್ತಿಗೆ ಸುರಿಯುವ ಮಳೆ ಸಾಮಾನ್ಯ. ಮಳೆಯನಡುವೆ ಪರ್ವತದ ಅಂಚಿನಲ್ಲಿ ಚಾರಣ ಮಾಡುವುದು ಕಷ್ಟವಾದ್ದರಿಂದ ಅಲ್ಲಿದ್ದ ಅನುಭವಿ ಚಾರಣಿಗರು ಎಲ್ಲರನ್ನೂ ಸಾಧ್ಯವಾದಷ್ಟು ಬೇಗ ಗುರಿ ಮುಟ್ಟಿಸಲು ನಮ್ಮೆಲ್ಲರನ್ನು ಹುರಿದುಂಬಿಸುತ್ತಿದ್ದರು. ಅಂದಾಜು ಒಂದು ಘಂಟೆಯ ಚಾರಣದ ನಂತರ ಸ್ವಲ್ಪ ಸ್ವಲ್ಪವಾಗಿ ಸೂರ್ಯಕಿರಣ ಕಾಣಲಾರಂಭಿಸಿತು. :) ಆದರೆ ಅದು ಇದ್ದದ್ದು ಕೇವಲ ೫ ನಿಮಿಷಗಳು ಮಾತ್ರ. ಆದರೂ ಆ ನಡುವೆಯೇ ನಮಗೆ ಛಾಯಾಗ್ರಹಣಕ್ಕೆ ಸಮಯ ಸಿಕ್ಕಿತ್ತು. ಮೋಡಗಳು ನಮ್ಮ ಕಾಲಕೆಳಗೆ ತೇಲಾಡುತ್ತಿದ್ದವು. ಇದುವರೆವಿಗೂ ಮೋಡದ ಒಳಗೇ ಚಾರಣ ಮಾಡುತ್ತಿದ್ದ ನಮಗೆ ಪ್ರಕೃತಿಯ ಸೊಬಗು ಕಂಡಿದ್ದು ಆ ೫ ನಿಮಿಷಗಳಲ್ಲೇ ಹೆಚ್ಚು. ಪರ್ವತಗಳ ನಡುವೆ ಕಂಡುಬರುವ ಕಣಿವೆಗಳ ನೋಟ, ಮೋಡಗಳ ತೇಲಾಟ ಎಲ್ಲವೂ ನಯನ ಮನೋಹರವಾಗಿತ್ತು.

ಇದುವರೆವಿಗೂ ತಮ್ಮ ಬ್ಯಾಗಿನಲ್ಲಿ ಬೆಚ್ಚಗೆ ಕುಳಿತಿದ್ದ ಎಲ್ಲಾ ಕ್ಯಾಮರಗಳೂ ಆ ಸೊಬಗನ್ನು ನೋಡಲು ಹೊರಗೆ ಬಂದಿದ್ದವು. ಅಲ್ಲಿ ಕ್ಯಾಮರ ಹೊಂದಿದ್ದ ಪ್ರತಿಯೊಬ್ಬರೂ ಆಗ ಅತ್ಯುತ್ತಮ ಛಾಯಾಗ್ರಾಹಕರೇ !!!! :D




ನಾವೆಲ್ಲಾ ಸುಮಾರು ೧೨:೪೦ ರ ಹೊತ್ತಿಗೆ Lunch point ತಲುಪಿದ್ದೆವು. ನಮ್ಮ Lunch point ಒಂದು Tar-roadನ ಹತ್ತಿರವಿದ್ದ View point. ಅಲ್ಲಿಂದ ಸುತ್ತಮುತ್ತಣ ಪರ್ವತ ಶ್ರೇಣಿಗಳು, ನಿಸರ್ಗದ ಹಸಿರಿನ ಸಿರಿ ಎಲ್ಲಾ ರಮಣೀಯವಾಗಿ ಕಾಣುತ್ತಿತ್ತು. ನಾವು ಊಟಮಾಡಲು ಆಯ್ಕೆಮಾಡಿದ ಸ್ಥಳದಲ್ಲಿಯೇ ಚಿಕ್ಕಮಗಳೂರಿನ ಕೆಲವು ಪ್ರಾಧ್ಯಾಪಕರು, ಮತ್ತೆ ಕೆಲವು Business men ಗಳೂ ಸೇರಿ ಅಲ್ಲಿ ತಮ್ಮ Party ಆಚರಿಸಲು ಬಂದಿದ್ದರು :P. ಅವರೊಡನೆ ಸ್ವಲ್ಪ ಮಾತುಕತೆಯಾದ ನಂತರ ನಮಗೆ ಅವರಿಂದ ಸ್ವಲ್ಪ ತಿಂಡಿ ಮತ್ತು ಹಣ್ಣುಗಳು ಸಿಕ್ಕಿತು. ಸುಮಾರು ೧೨:೪೦ ರ ಹೊತ್ತಿಗೆ ನಮ್ಮ ಊಟದ ಕಾರ್ಯಕ್ರಮ ಸಂಪನ್ನ ಗೊಂಡಿತ್ತು.




ಅಲ್ಲಿ ಬಂದವರೊಂದಿಗೆ ಕೆಲವು Photo ತೆಗೆಸಿಕೊಂಡು ಅಲ್ಲಿಂದ ಸುಮಾರು ೧೩:೩೦ರ ಹೊತ್ತಿಗೆ ನಮ್ಮ ಚಾರಣವನ್ನು ಮುಂದುವರೆಸಿದೆವು. ನಮ್ಮ ಮುಂದಿನ ಗುರಿ ಇದ್ದದ್ದು BSNLನ tower ಬಳಿಗೆ. ಸಾಮಾನ್ಯ ದಿನಗಳಂದು ಬರಿಗಣ್ಣಿಗೆ ಕಾಣುವ ಈ tower ಅಂದು ಮುಸುಕಿದ್ದ ಮಂಜಿನ ಕಾರಣದಿಂದ ನಮಗೆ ಕಾಣಿಸಲಿಲ್ಲ. GPSನ ಸಹಾಯ ಪಡೆದು ಪರ್ವತದ ಮತ್ತೊಂದು ತುದಿಯಲ್ಲಿದ್ದ ಆ towerನೆಡೆಗೆ ನಾವೆಲ್ಲಾ ಪರ್ವತದ ಅಂಚಿನಲ್ಲಿ ಹೆಬ್ಬಂಡೆಗಳ ನಡುವೆ ಸಾಹಸ ಪಡುತ್ತಾ ನಡೆಯುತ್ತಿದ್ದೆವು. ನಮ್ಮ ಗುರಿಯಿದ್ದದ್ದು ಆ ಟವರ್ರಿನ ಬಳಿಯಿರುವ ರಸ್ತೆ ಸೇರಿ ಅಲ್ಲಿಂದ ಅಂದಾಜು ೭ ಕಿ.ಮೀ ದೂರವನ್ನ ಕ್ರಮಿಸಿ ಬಾಬಾ ಬುಡನ್ ಗಿರಿಯನ್ನು ತಲುಪಬೇಕೆನ್ನುವುದು. ಅದಕ್ಕಾಗಿ ನಾವು ಹುಲ್ಲುಗಾವಲುಗಳು ಮತ್ತು ಹೆಬ್ಬಂಡೆಯಿಂದ ಕೂಡಿದ ಪರ್ವತಗಳನ್ನ ದಾಟಿ ಹೋಗಬೇಕಿತ್ತು.



ನಾವು ನಡೆಯುತ್ತಿದ್ದ ಹಾದಿಯಲ್ಲಿ ಯಾವುದೇ ಕಾಲುದಾರಿಯ ಕುರುಹುಗಳಿರದ ಕಾರಣ ನಮ್ಮ ದಾರಿಯನ್ನು ನಾವೇ ಕಂಡುಕೊಂಡು ಮುನ್ನಡೆಯಬೇಕಿತ್ತು. ಹೀಗಿರುವಾಗ ಮಾರ್ಗಮಧ್ಯದಲ್ಲಿ ನಮಗೆ ಹೆಬ್ಬಂಡೆಯೊಂದು ಎದುರಾಗಿ ಎತ್ತಕಡೆ ಹೋಗುವುದು ಎಂದು ಯೋಚಿಸುವಂತಾಯಿತು. ಸ್ವಲ್ಪ ವಾಲಿಕೊಂಡಿದ್ದ ಆ ಬಂಡೆಯನ್ನು ದಾಟಿ ಹೋಗಲು ಒಂದೋ ಅದರ ಕೆಳಗಿನಿಂದ ಇದ್ದ ಸ್ವಲ್ಪವೇ ಜಾಗದಲ್ಲಿ ನುಸುಳಿಕೊಂಡು ಹೋಗಬೇಕು, ಇಲ್ಲವಾದಲ್ಲಿ ಅದನ್ನ ಜಾಗ್ರತೆಯಿಂದ ಹತ್ತಿ ದಾಟಬೇಕಾಗಿತ್ತು. ಎರಡೂ ಕಷ್ಟವಾದ ಕೆಲಸಗಳೇ. ಮಂಜಿನಿಂದ ಸ್ವಲ್ಪ ಒದ್ದೆಯಾಗಿದ್ದ ಆ ಬಂಡೆಯ ಕೆಳಗೆ ನುಸುಳುವಾಗ ಅಥವಾ ಹತ್ತಿ ದಾಟುವಾಗ ಆಯತಪ್ಪಿದಲ್ಲಿ ಪರ್ವತದಿಂದ ನೇರವಾಗಿ ಕೆಳಗೆ ಬೀಳುವುದೇ !!!! ನಮ್ಮಲ್ಲಿ ಕೆಲವರು ಆ ಬಂಡೆಯ ಕೆಳಗಿನಿಂದ ನುಸುಳಿದರೆ ಮಿಕ್ಕವರು ಅದನ್ನು ಏರಿಕೊಂಡು ಹಾಗೂ ಹೀಗೂ ದಾಟಿ ಬಂದರು. ಕೆಲವು ಬಂಡೆಗಳು ಮಂಜಿನ ನೀರಿಗೆ ಒದ್ದೆಯಾದ್ದರಿಂದ ನಮ್ಮ ಕಾಲುಗಳು ಜಾರುತ್ತಲಿದ್ದವು. ಇಂತಹಾ ಸಮಯದಲ್ಲಿ ನಿಮ್ಮ ಅನುಭವ ಮತ್ತು ತಾಳ್ಮೆಯೇ ನಿಮಗೆ ಶ್ರೀರಕ್ಷೆ. ಒಂದು ಹಂತದಲ್ಲಿ ನಮ್ಮೊಂದಿಗೆ ಬಂದಿದ್ದ ಪ್ರವೀಣ್ ಆ ಬಂಡೆಗಳನ್ನು ಹತ್ತಲಾಗದೇ ನಮ್ಮ Lunch Point ಗೆ ಮರಳಿ ಅಲ್ಲಿಂದ ಇದ್ದ ರಸ್ತೆಯಲ್ಲಿ ಯಾವುದಾದರೂ ಬಸ್ ಹಿಡಿದು ಬಾಬಾ ಬುಡನ್ ಗಿರಿಗೆ ಬರುವುದಾಗಿ ಹೇಳಿದರೂ ನಂತರ ಪ್ರಯಾಸದಿಂದ ನಮ್ಮ ಮಾರ್ಗದಲ್ಲೇ ಬಂದದ್ದು ನಮಗೂ ಮತ್ತು ಅವನಿಗೂ ಖುಷಿತಂದಿತ್ತು.


ಬಂಡೆಗಳನ್ನ ದಾಟಿ ನಂತರ ಹುಲ್ಲುಗಾವಲಿನ ಚಾರಣ ಆರಂಭವಾಯಿತು. ಇಷ್ಟು ಹೊತ್ತಿಗೆ ನಮ್ಮನ್ನಾವರಿಸಿದ್ದ ಮಂಜು ಕರಗಿದ್ದದ್ದರಿಂದ ನಮಗೆ ದೂರದಲ್ಲಿ ನಿಂತಿದ್ದ ಟವರ್ ಕಾಣುತ್ತಿತ್ತು. ಬಂಡೆಗಳನ್ನ ಹತ್ತುವ ಸಾಹಸವಿಲ್ಲದ್ದರಿಂದ ಎಲ್ಲಾ ಹುಲ್ಲುಗಾವಲಿನಲ್ಲಿ ಸ್ವಲ್ಪ ಸುಧಾರಿಸಿಕೊಂಡು ನಡೆಯುತ್ತಿದ್ದೆವು. ಇದೇ ಜಾಗದ ಸಪೀಪದಲ್ಲಿ ಇರುವುದೇ "ಮಾಣಿಕ್ಯಧಾರಾ". ನಾವೆಲ್ಲಾ ಸುಮಾರು ೧೬:೦೦ ರ ಹೊತ್ತಿಗೆ BSNL ಟವರ್ರಿನ ಹತ್ತಿರವಿರುವ ಪಾಳುಬಿದ್ದಿದ್ದ ಪೋಲೀಸ್ ಚೆಕ್ ಪೋಸ್ಟ್ ಬಳಿ ಬಂದೆವು. ಅಲ್ಲಿ ಕೆಲವರು ಕುಳಿತುಕೊಂಡು ಸುಧಾರಿಸಿಕೊಂಡರೆ ಮಿಕ್ಕವರು ಆ ಟವರ್ರನ್ನು ಹತ್ತುವ ಸಾಹಸ ಮಾಡುತ್ತಿದ್ದರು. :D


ಅಲ್ಲಿಂದ ನಮ್ಮ ಚಾರಣ ೧೪:೩೦ಕ್ಕೆ ಮತ್ತೆ ಪ್ರಾರಂಭವಾಗಿ ಡಂಬಾರು ರಸ್ತೆಯ ಮೂಲಕ ಬಾಬಾ ಬುಡನ್ ಗಿರಿಯತ್ತ ಹೊರಟಿತ್ತು. ಮಾರ್ಗಮಧ್ಯದಲ್ಲಿ ನಮಗೆ ಕೆಲವು ಸುಂದರವಾದ Photoಗಳು ಸೆರೆ ಸಿಕ್ಕವು. ನಾವಲ್ಲಿಂದ ಹೋಗುತ್ತಿದ್ದಂತೆಯೇ ನಮ್ಮನ್ನ ಗಾಳೀಕೆರೆಗೆ ಕರೆದೊಯ್ಯಲು ಜೀಪ್ ಡ್ರೈವರ್ ಗಳು ಪೈಪೋಟಿ ನಡೆಸುತ್ತಿದ್ದರು. ಕೊನೆಗೆ ಒಂದು ಜೀಪ್ ಚಾಲಕನ ಹತ್ತಿರ ಹರ್ಷ ಮಾತನಾಡಿ ಚರ್ಚೆ ಮಾಡಿ ಅವನಿಗೆ ನಮ್ಮ ಲಘು ಉಪಹಾರವನ್ನು ಮುಗಿಸುವ ವರೆಗೆ ಕಾಯುವಂತೆ ಹೇಳಿ ಹೊಟೇಲಿನ ಕಡೆಗೆ ನಡೆದೆವು, ಸಮಯ ಸುಮಾರು ೧೭:೧೫ ಆಗಿರಬಹುದು. ನಾನು, ಹರ್ಷ, ಪ್ರವೀಣ್ ಮತ್ತೆ ವಿಶ್ವನಾಥ್ ಸಸ್ಯಾಹಾರಿಗಳಾದ್ದರಿಂದ ಪರೋಟ ಮತ್ತು ದಾಲ್ ತಿಂದರೆ ಮಿಕ್ಕವರು ಆಮ್ಲೇಟನ್ನು ಸವಿದರು. ಅಲ್ಲಿಂದ ಕೇವಲ ೧೦ ನಿಮಿಷದ ದಾರಿಕ್ರಮಿಸಿದ ನಂತರ ನಮ್ಮ ಮುಂದಿನ ಗುರಿ ಸಿಕ್ಕಿಬಿಟ್ಟಿತು, ಅದೇ ಗಾಳೀಕೆರೆ. ಇಷ್ಟು ಹೊತ್ತಿಗೇ ಸಂಜೆ ೧೮:೩೦ರ ಸಮಯ, ಮಂಜು ನಮ್ಮನ್ನು ಸ್ವಲ್ಪ ಸ್ವಲ್ಪವಾಗೇ ನುಂಗುತ್ತಿತ್ತು.


ಸಂಜೆ ಅಲ್ಲಿಯೇ Camping ಆದ್ದರಿಂದ ನಾವೆಲ್ಲಾ ನಮ್ಮ ಬೆನ್ನ ಮೇಲಿದ್ದ ಹೊರೆಯನ್ನು ಕೆಳಗಿಳಿಸಿ ಸ್ವಲ್ಪ ವಿಶ್ರಾಂತಿ ಪಡೆದೆವು. ಪರ್ವತಗಳಿಂದ ಮೂರೂಕಡೆಗಳಿಂದ ಆವರಿಸಲ್ಪಟ್ಟ ಪ್ರದೇಶವಿದು. ಮತ್ತೊಂದೆಡೆ ದೊಡ್ಡ ಕಣಿವೆ, ಅಲ್ಲಿಯೇ ಒಂದು ಪುಟ್ಟ ಕೆರೆ. ಆ ಕೆರೆ ಎಷ್ಟು ದೊಡ್ಡದೆಂದು ನೋಡಲಾಗಲಿಲ್ಲ, ಎತ್ತನೋಡಿದರೂ ಅಲ್ಲಿ ಬರೀ ಮಂಜನ್ನು ಬಿಟ್ಟರೆ ಬೇರೇನೂ ಕಾಣಿಸುತ್ತಿರಲಿಲ್ಲ. ಆ ಸ್ಥಳದಲ್ಲಿ ಒಂದು ಗುಡಿಸಲಿನ ಅಳಿದುಳಿದ ಕಂಬಗಳಿದ್ದವು. ಅಲ್ಲಿ ೩ Tentಗಳನ್ನು ಹಾಕಲು ಸ್ಥಳಾವಕಾಶವಿಲ್ಲದ್ದರಿಂದ ಅಲ್ಲಿಂದ ಸ್ವಲ್ಪ ಮುಂದೆ ಸಮತಟ್ಟಾದ ಪ್ರದೇಶದಲ್ಲಿ ನಮ್ಮ Tentಗಳನ್ನ ಹಾಕುವುದಾಗಿ ನಿರ್ಧರಿಸಿ Tentಗಳನ್ನ ಹಾಕಲು ಶುರುಮಾಡಿದೆವು. ಸಂಜೆ ಮಂಜು ಮುಸುಕಿದ್ದರಿಂದ ಬಹಳ ಬೇಗ ಕತ್ತಲು ಆವರಿಸುತ್ತಿತ್ತು. ಅನೀಸ್ ಮತ್ತು ತಂಡ ಬಿಸಿನೀರಿನ ವ್ಯವಸ್ಥೆಮಾಡಲು ಶುರುಮಾಡಿದರೆ ನಾವೆಲ್ಲಾ ಟೆಂಟ್ ಗಳನ್ನ ಹಾಕುತ್ತಿದ್ದೆವು.

ಟೆಂಟ್ ಹಾಕಿದನಂತರ ನಾವೆಲ್ಲಾ ಊಟಕ್ಕೆ ಹಾಜರಾದೆವು. ಅಂದಿನ ಊಟ MTRರವರ Ready to eat Rice items ಆಗಿತ್ತು. ತಯಾರಿಸಲು ಬಹಳ ಸುಲಭವಾದ ಆ ಪ್ಯಾಕೇಟುಗಳನ್ನು ಕುದಿಯುತ್ತಿರುವ ನೀರಿಗೆ ಹಾಕಿ ೫ ನಿಮಿಷಗಳಕಾಲ ಬಿಟ್ಟರೆ ಬಿಸಿ ಬಿಸಿಯಾದ ರುಚಿ ರುಚಿಯಾದ ಅಡುಗೆ ಸಿದ್ದ. ಆದರೆ ಆ ಮಂಜು ಮುಸುಕಿದ್ದ ಬೆಟ್ಟದಲ್ಲಿ ಕುದಿಯುವ ನೀರನ್ನು ಸಿದ್ದಪಡಿಸುವುದೇ ಒಂದು ಸಾಹಸ. ಅಂತೂ ಇಂತೂ ಅನೀಸ್ ಮತ್ತವನ ತಂಡದಿಂದ ನಮ್ಮೆಲ್ಲರ ಊಟದ ಕಾರ್ಯಕ್ರಮ ಮುಗಿದಿತ್ತು.

ಕತ್ತಲು ಬೇಗನೇ ಆವರಿಸಿದ್ದರಿಂದ ಸುಮಾರು ೮.೩೦ಕ್ಕೆ ನಾವೆಲ್ಲಾ ನಮ್ಮ ನಮ್ಮ ಟೆಂಟಿನಲ್ಲಿ ಮಲಗಿದ್ವಿ. ನಾನು ಮತ್ತು ಪ್ರವೀಣ್ ಒಂದು ಟೆಂಟಿನಲ್ಲಿ ಮಲಗಿದ್ವಿ. ನಮ್ಮ ಟೆಂಟ್ ಸ್ವಲ್ಪ ಮಧ್ಯದಲ್ಲಿ ಇದ್ದದ್ದರಿಂದ ನಮಗೇನೂ ತೊಂದರೆ ಆಗಲಿಲ್ಲ. ಆದರೆ ಮಿಕ್ಕ ೨ ಟೆಂಟ್ ಗಳಲ್ಲಿದ್ದವರಿಗೆ ನಿದ್ರೆ ಇರಲಿಲ್ಲ ಅಂತ ಬೆಳಗ್ಗೆ ನಾನು ಎದ್ದಮೇಲೆ ತಿಳಿದದ್ದು. ರಾತ್ರಿ ರಭಸದಿಂದ ಬೀಸಿದ ಗಾಳಿ ಎರಡರಲ್ಲಿ ಒಂದು ಟೆಂಟಿನ ಮೇಲ್ಚಾವಣಿಯನ್ನ ಹಾರಿಸಿತ್ತಂತೆ. ನಂತರ ಅವರೆಲ್ಲಾ ಬೇರೆಕಡೆಗಳಲ್ಲಿ ಮತ್ತೆ ಟೆಂಟನ್ನ ಹಾಕಿ ಮಲಗಿದ್ರಂತೆ. ನಾವಿಬ್ಬರೂ ಚೆನ್ನಾಗಿ ನಿದ್ದೆ ಮಾಡಿದ್ವಿ :)

ಎರಡನೇ ದಿನ (ಭಾನುವಾರ) ನಮ್ಮ ಪಯಣ ಗಾಳೀಕೆರೆಯಿಂದ ಕೆಮ್ಮಣ್ಣುಗುಂಡಿಗೆ ಹೋಗಿ ಅಲ್ಲಿಂದ ಬೀರೂರಿನಲ್ಲಿರುವ ರೈಲ್ವೇನಿಲ್ದಾಣಕ್ಕೆಬಂದು ಅಲ್ಲಿಂದ ಬೆಂಗಳೂರಿನ ಕಡೆಗೆ.

ಬೆಳಗ್ಗೆ ೬.೩೦ಕ್ಕೆ ಎದ್ದು, ನಮ್ಮ ಎಲ್ಲಾಕೆಲಸವನ್ನೂ ಮುಗಿಸಿ ತಿಂಡಿ ತಿಂದು ಪಯಣ ಮುಂದುವರೆಸಿದೆವು. ಬೆಳಗಿನ ತಿಂಡಿಗೆ Cornflakes ಮತ್ತು ಹಾಲು.

ಮುರಿದು ಹೋಗಿದ್ದ ಗುಡಿಸಲಿನ ಮಧ್ಯದಲ್ಲಿ ಮೂರುಕಲ್ಲುಗಳನ್ನು ಇಟ್ಟು ಒಲೆ ಹತ್ತಿಸಿ ಹಾಲನ್ನು ಬಿಸಿಮಾಡಿಕೊಂಡು ಅದಕ್ಕೆ Cornflakes ಹಾಕಿ ತಿಂದೆವು. ನಾನು ಕೊಂಡೊಯ್ದಿದ್ದ ಸೌತೇಕಾಯಿಯನ್ನು ತಿನ್ನಲು ಇನ್ನೂ ಸಮಯ ಬಂದಿರದ ಕಾರಣ ಅದನ್ನು ಮತ್ತೆ ನನ್ನ ಬ್ಯಾಗಿಗೆ ಹಾಕಿಕೊಂಡು ಅಲ್ಲೇ ಕೆಲವು photo ಕ್ಲಿಕ್ಕಿಸಿ ಅಂದಾಜು ೮.೩೦ಕ್ಕೆ ನಮ್ಮ ಪಯಣ ಅಲ್ಲಿಂದ ಉತ್ತರದಿಕ್ಕಿನೆಡೆಗೆ ಮುಂದುವರೆಯಿತು. ದಟ್ಟವಾದ ಮಂಜು ಮುಸುಕಿದ್ದರಿಂದ ನಮ್ಮ ಎಲ್ಲಾ ಕಾರ್ಯಗಳೂ ನಿಧಾನಗತಿಯಲ್ಲಿ ಸಾಗುತ್ತಿತ್ತು.

ಅಂದಾಜು ೧೪ ಕಿಲೋಮೀಟರಿನ ಈ ಹಾದಿ ಕಠಿಣವಾದ ಹಾದಿಯೇನಲ್ಲ. ಮಾರ್ಗಮಧ್ಯದಲ್ಲಿ ನಮಗೆ ಹಲವಾರು ಶೋಲಾಗಳು (ಎರಡುಪರ್ವತಗಳು ಸೇರುವ ಮಧ್ಯದ ಕಾಡು) ಮತ್ತೆ ಕೆಲವು ಪರ್ವತದ ಅಂಚು ಮತ್ತೆ ಕೆಲವು ಝರಿಗಳು ಈ ಮಾರ್ಗದಲ್ಲಿ ಸಿಕ್ಕುತ್ತವೆ.


ಮಾರ್ಗ ಪೂರ್ಣವಾಗಿ ಮಂಜು ಮುಸುಕಿದ್ದರಿಂದ ಪ್ರತಿಯೊಬ್ಬರೂ ನಿರ್ಧಿಷ್ಟ ಅಂತರದಲ್ಲಿ ಮುಂದುವರೆಯುತ್ತಿದ್ದೆವು. ಹೆಚ್ಚುದೂರ ಬಂದರೆ ಇಬ್ಬರ ನಡುವೆ ಮಂಜು ಆವರಿಸಿ ದಾರಿ ಕಾಣಿಸುತ್ತಿರಲಿಲ್ಲ. ಗಾಳೀಕೆರೆಯಿಂದ ಕೆಮ್ಮಣ್ಣುಗುಂಡಿಯ ವರೆಗೂ ಇರುವ ಹಾದಿಯನ್ನ "ರಾಜ-ಹಾದಿ" ಎನ್ನುತ್ತಾರಂತೆ. ಹಿಂದೆ ರಾಜ ಮಹರಾಜರುಗಳು ಇದೇಹಾದಿಯಲ್ಲಿ ಕ್ರಮಿಸುತ್ತಿದ್ದರಂತೆ. ನಾವು ಚಾರಣ ಮಾಡುವಹೊತ್ತಿಗೆ ಆ ವಿಶಾಲವಾದ ಹಾದಿ ಬಹುತೇಕ ಗಿಡಗಂಟೆಗಳಿಂದ ಮುಚ್ಚಲ್ಪಟ್ಟಿತ್ತು. ನಮ್ಮೊಡನೆ GPS ಇಲ್ಲದಿದ್ದಲ್ಲಿ ಮಾರ್ಗಮಧ್ಯೆ ಕಳೆದುಹೋಗುವ ಸಂಭವ ಹೆಚ್ಚಿತ್ತು. ಚಾರಣದ ಮಧ್ಯೆ ಮಂಜಿಲ್ಲದ ದಿನಗಳಲ್ಲಿ ಹಾದಿ ಸುಗಮವಾಗಿರುತ್ತದೆ. ಮಾರ್ಗಮಧ್ಯೆ ನಮಗೆ ಅಂದಾಜು ೬-೭ ಶೋಲಾ ಕಾಡುಗಳು ಎದುರಾಗುತ್ತವೆ. ಅಲ್ಲೆಲ್ಲಾ ನಿಮ್ಮ ದಾರಿಯನ್ನು ನೀವೇ ಮಾಡಿಕೊಂಡು ಮುನ್ನಡೆಯಬೇಕು. ಸಹಚಾರಣಿಗರು ತಂದಿದ್ದ "ಖರ್ಜೂರ" ಮತ್ತು "ಟ್ಯಾಂಗ್" ಅನ್ನು ಸೇವಿಸುತ್ತಾ ಮಾರ್ಗ ಮಧ್ಯದಲ್ಲಿ ಜೋಫಿನ್ ಮತ್ತು ಸಂಗಡಿಗರ ನೃತ್ಯ ಕಾರ್ಯಕ್ರಮವನ್ನ ನೋಡಿಕೊಂಡು ಮುಂದುವರೆದೆವು. :) ಹರ್ಷ ಅದರ ವಿಡಿಯೋ ಚಿತ್ರಣ ಮಾಡಿದರು, ಮಂಜಿನ ಮಧ್ಯೆ ಹೇಗೆ ಮೂಡಿ ಬಂದಿತ್ತೂ... ನಾನು ನೋಡಲಾಗಲಿಲ್ಲ.

ಶೋಲಾ ಕಾಡುಗಳನ್ನೆಲ್ಲಾ ದಾಟಿ ಒಂದು ಬಯಲಿನಲ್ಲಿ ಸ್ವಲ್ಪ ಹೊತ್ತು ವಿಶ್ರಮಿಸಿದೆವು. ಎಲ್ಲರಿಗೂ ದಣಿವಾದ್ದರಿಂದ ಮತ್ತೆ ನಮ್ಮ "ಟ್ಯಂಗ್" ಕುಡಿದು ಪಯಣ ಮುಂದುವರಿಸಿದೆವು. ಮಧ್ಯಹ್ನ ಅಂದಾಜು ೧೨.೦೦ ಘಂಟೆಗೆ ನಮ್ಮ ಮತ್ತೊಂದು ವಿರಾಮ. ಅಷ್ಟು ಹೊತ್ತಿಗಾಗಲೇ ಸೂರ್ಯ ನಮ್ಮನ್ನು ನೋಡಲು ತನ್ನ ಕಿರಣಗಳನ್ನ ಬೀರಿದ್ದ, ಮಂಜು ಕರಗುತ್ತಿತ್ತು.

ಆ ಸ್ಥಳದ ಎದುರಿನಲ್ಲಿ ದಟ್ಟವಾದ ಕಾಡಿನಿಂದಾವೃತವಾದ ಕಣಿವೆ, ಮತ್ತು ಭದ್ರಾ ಅಣೇಕಟ್ಟೆಯ ನಯನ ಮನೋಹರವಾದ ದೃಷ್ಯ ನಮ್ಮ ದಣಿವನ್ನು ಮರೆಯಾಗಿಸಿತ್ತು. ಅಲ್ಲಿ ನಮ್ಮ ಕಣ್ಣುಗಳಲ್ಲದೇ ಕ್ಯಾಮರಾ ಕಣ್ಣುಗಳೂ ಆ ಸೊಬಗನ್ನ ಸೆರೆಹಿಡಿಯುತ್ತಿದ್ದವು.



ಆ ವಿರಾಮದಲ್ಲಿ ನಮಗೆಲ್ಲಾ ಮೊದಲೇ ತಂದಿದ್ದ Dil-pasand ಮತ್ತು Cream-bun ನೀಡಲಾಯಿತು. ನನ್ನ ಬ್ಯಾಗಿನಲ್ಲಿ ಇಲ್ಲಿಯ ತನಕ ಜೊತೆಯಾಗಿ ಬಂದಿದ್ದ ಸೌತೇಕಾಯಿಯನ್ನು ಎಲ್ಲರಿಗೂ ನೀಡಿ ನನ್ನ ಭಾರವನ್ನ ಕಡಿಮೆ ಮಾಡಿಕೊಂಡೆ ;) ಅಲ್ಲಿಂದ ಕೆಳಗೆ ಕಣಿವೆಯ ಕಡೆಗೆ ಇಳಿದರೆ ಒಂದು ಗುಹೆ ಇದೆಯಂತೆ, ನಮ್ಮಲ್ಲಿ ಕೆಲವರು ಅತ್ತಕಡೆಗೆ ಹೊರಟರು. ಮಿಕ್ಕವರು ಕೆಮ್ಮಣ್ಣುಗುಂಡಿಯ ಹಾದಿ ಹಿಡಿದೆವು. ಹಾಗೆಯೇ ಮುಂದೆ ಸಾಗುವಾಗ ಅಲ್ಲಿ ಮಹಾರಾಜರು ಹಿಂದೆ ತಂಗಲು ಬಳಸುತ್ತಿದ್ದ ಮಹಲಿನ ಪಳಯುಳಿಕೆ ಇದೆ. ದಾರಿಯುದ್ದಕ್ಕೂ ಪ್ರಕೃತಿಯ ಸೊಬಗನ್ನ ಸಾಧ್ಯವಾದಷ್ಟೂ ನನ್ನ ಕ್ಯಾಮರದ ಒಳಗಡೆ ತುಂಬಿಸುವ ಪ್ರಯತ್ನ ಮಾಡುತ್ತಾ ನಮ್ಮ ಅಂತಿಮವಾದ ಮತ್ತು ಕಠಿಣವಾದ ಮಾರ್ಗದ ಮುಂದೆ ಬಂದು ನಿಂತಾಗ ಸಮಯ ಸುಮಾರು ೧.೩೦.

ಈ ದುರ್ಗಮವಾದ ಹಾದಿ ಎದುರಾಗುವಮುನ್ನ ನಮಗೆ ಕೆಮ್ಮಣ್ಣುಗುಂಡಿಯ ಕಟ್ಟಡಗಳು ಬರಿಗಣ್ಣಿಗೇ ಕಾಣುತ್ತವೆ, ಆದರೆ ಮಾರ್ಗಮಾತ್ರ ಕಾಣುವುದಿಲ್ಲ. ಹಾಗಾಗಿ ಆ ಹಾದಿಯನ್ನ ನಾವೇ ಮಾಡಿಕೊಂಡು ಕೆಳಗಿಳಿಯಬೇಕು. ಮನು ಮತ್ತು ಹರ್ಷ ಕೆಳಗಿಳಿಯುವ ಹಾದಿಯ ಪತ್ತೆಯಲ್ಲಿ ತೊಡಗಿ ವಿಫಲರಾದರು. ಕಾರಣ ಅಷ್ಟು ದಟ್ಟವಾದ ಆ ಕಾಡುಮರಗಳು ಮತ್ತು ಮುಳ್ಳಿನಿಂದ ಕೂಡಿದ ಪೊದೆಗಳು.

ಸುಮಾರು ೩೦ ನಿಮಿಷದ ಹಾದಿಯಲ್ಲಿ ೬ ಅಡಿಗೂ ಮೀರಿದ ಎತ್ತರದ ಪೊದೆಗಳನ್ನು ಸರಿಸುತ್ತಾ ನಾವೆಲ್ಲಾ ಯುದ್ದಕ್ಕೆ ಹೊರಟ ಸೈನಿಕರಂತೆ ಮುನ್ನುಗ್ಗುತ್ತಿದ್ದೆವು. ನಮ್ಮ ಗುರಿಇದ್ದದ್ದು ಕೆಮ್ಮಣ್ಣುಗುಂಡಿಯೊಂದೇ. ಮಾರ್ಗಮಧ್ಯದಲ್ಲಿ ನಮ್ಮನ್ನು ದಾರಿ ತಪ್ಪಿಸುವ ಹಾದಿಗಳು ಹಲವಾರು, ಆದರೆ ನಾವು ಕೇವಲ GPSನ ಮಾತನ್ನು ಮಾತ್ರ ಕೇಳುತ್ತಾ ಮುನ್ನಡೆದೆವು. ಮಾರ್ಗಮಧ್ಯದಲ್ಲಿ ಮತ್ತೊಮ್ಮೆ ಕಡಿದಾದ ಪರ್ವತವನ್ನು ಹತ್ತಬೇಕಾಯಿತು, ಆದರೆ ಹತ್ತಲು ಯಾವುದೇ ಆಧಾರವಿರಲಿಲ್ಲ, ಇದ್ದದ್ದು ಅಲ್ಲಿ ಬೆಳೆದು ನಿಂತಿದ್ದ ಮುಳ್ಳಿನ ಪೊದೆಗಳಷ್ಟೇ. ನಾನು ನನ್ನ ಕೈಗಳಿಗೆ Glove ಹಾಕಿದ್ದರಿಂದ ಆ ಪೊದೆಗಳನ್ನ ಸರಿಸಲು ಅನುಕೂಲವಾಯಿತು. ಮುಳ್ಳಿನ ಪೊದೆಗಳು ನಮ್ಮ ಮೈ ಮೇಲೆ ಮಾಡಿದ್ದ ಗಾಯಗಳು ನಮ್ಮ ಮುಖ್ಯಹಾದಿ ದೊರೆತ ಸಂಭ್ರಮದಲ್ಲಿ ಮರೆಯಾಗಿದ್ದವು. ಅಂತೂ ಇಂತೂ ನಾವೆಲ್ಲಾ ಸುರಕ್ಷಿತವಾಗಿ ಮುಖ್ಯ ರಸ್ತೆಯಲ್ಲಿದ್ದೆವು... ಹುರ್ರೇ..... :D

ನಾವೆಲ್ಲಾ ಕೆಮ್ಮಣ್ಣುಗುಂಡಿ ತಲುಪಿ ವಿಶ್ರಮಿಸಿಕೊಳ್ಳುತ್ತಿರುವಾಗ ಹರ್ಷ ಮತ್ತವನ ಸಂಗಡಿಗರು ಅಲ್ಲಿಂದ ಬೀರೂರಿಗೆ ಹೊರಡಲು ನಮಗೆ ಜೀಪಿನ ವ್ಯವಸ್ಥೆ ಮಾಡಲು ಹೊರಟಿದ್ದರು. ನಾವೆಲ್ಲಾ ಎರಡು ಜೀಪಿನಲ್ಲಿ ಬೀರೂರಿನ ಕಡೆಗೆ ಪಯಣ ಬೆಳೇಸಿದೆವು.

ಮಾರ್ಗಮಧ್ಯದಲ್ಲಿ ಬಣ್ಣ ಬಣ್ಣದ ಕಾಮನಬಿಲ್ಲು ನಮ್ಮನ್ನೆಲ್ಲಾ ಬೀಳ್ಗೊಟ್ಟಿತು. ಬೀರೂರಿನಿಂದ ನಮ್ಮ ರೈಲ್ವೇ ಪ್ರಯಾಣ ೫.೪೫ಕ್ಕೆ ಶುರುವಾಗಿ ೯.೨೦ಕ್ಕೆ ಬೆಂಗಳೂರನ್ನು ತಲುಪಿದೆವು. ಅಲ್ಲಿಂದ ನಾನು ನನ್ನ ಮನೆಯಕಡೆ ಹೊರಡುವ BMTC ಹತ್ತಿ ಮನೆಗೆ ಬಂದೆ.


ನಿಸರ್ಗಮಾತೆಯ ಮಡಿಲಿನಲ್ಲಿ ಕಳೆದ ಆ ೨ ದಿನ ಅವಿಸ್ಮರಣೀಯ.... :)

Monday, November 17, 2008

ಹುನ್ಕಲ್ ವುಡ್

ಪ್ರತೀ ಸಲದಂತೆ ಈ ಸಲವೂ ಡಿಸೆಂಬರಿನಲ್ಲಿ ನಮ್ಮ ಚಾರಣದ ಕಾರ್ಯಕ್ರಮಕ್ಕೆ ತಯಾರಿ ನಡೆಯುತ್ತಿತ್ತು. ಕಳೆದಬಾರಿ ಅಣ್ಣನ ಮಗಳಿನ ನಾಮಕರಣವಿದ್ದಿದ್ದರಿಂದ ನನಗೆ ಚಾರಣಕ್ಕೆ ಹೋಗಲಾಗಿರಲಿಲ್ಲ. ವರುಷದ ಮಿಕ್ಕ ದಿನಗಳಲ್ಲಿ ಯಾಂತ್ರಿಕಜೀವನದಿಂದ ಸ್ವಲ್ಪ ಬದಲಾವಣೆ ಇರಲೆಂದು ನಮ್ಮ ಚಾರಣದ ತಂಡ ಡಿಸೆಂಬರಿನಲ್ಲಿ ಚಾರಣಕ್ಕೆ ಹೋಗುವುದು ವಾಡಿಕೆ. ಕಳೆದಬಾರಿ ಪ್ರಕೃತಿಯ ಮಡಿಲಿನಲ್ಲಿ ವಿಹರಿಸುವ ಅವಕಾಶ ಕೈತಪ್ಪಿದ್ದರಿಂದ ಈ ಸಲವಾದರೂ ಚಾರಣಕ್ಕೆ ಹೋಗಲೇಬೇಕೆಂದು ಮೊದಲೇ ಮನದಲ್ಲಿ ಎಣಿಸಿದ್ದೆ. ನಾನು ಖಂಡಿತವಾಗಿ ಬರುವುದಾಗಿಯೂ ತಿಳಿಸಿದ್ದೆ.

ಆದರೆ ಸ್ವಲ್ಪದಿನಗಳ ನಂತರವಷ್ಟೇ ನೆನಪಾಗಿದ್ದದ್ದು.... ನಾವು ಚಾರಣಕ್ಕೆ ಹೊರಡುವ ದಿನಾಂಕದಂದೇ ಅಪ್ಪನ ಮಾಸಿಕ ಇದೆಯೆಂದು. ಚಾರಣಕ್ಕಿಂತಾ ಮಾಸಿಕ ಮುಖ್ಯವಾದದ್ದರಿಂದ ಈ ಸಲವೂ ಚಾರಣದ ಅವಕಾಶ ಕೈ ತಪ್ಪಿ ಹೋಯಿತು. ಪ್ರಕೃತಿಯ ಮಡಿಲಿನಲ್ಲಿ ಪ್ರತಿವರುಷವೂ ಕಳೆಯುತ್ತಿದ್ದ ದಿನಗಳನ್ನು ಈ ಸಲ ಕಳೆಯಲಾಗಲಿಲ್ಲ ಎಂದುಕೊಳ್ಳುತ್ತಿರುವಾಗಲೇ ಮನೋಹರ ೨ ದಿನಗಳ ಚಾರಣದಬಗ್ಗೆ ಹೇಳಿದ. ಚಾರಣದ ಸ್ಥಳ, ಹೊರಡುವ ವೇಳೆ, ಅಲ್ಲಿಗೆ ಹೋಗುವ ವ್ಯವಸ್ಥೆ ಎಲ್ಲಾ ತಿಳಿದುಕೊಂಡು ನಾನು ಬರುವುದಾಗಿ ಹೇಳಿ ಆ ವಿಚಾರವಾಗಿ ಅದರಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡೆ. ಹರ್ಷ ಈ ಚಾರಣದ ಜವಾಬ್ದಾರಿಯನ್ನು ಹೊತ್ತಿದ್ದರು. ಪ್ರಾಕ್-ಸಿಸ್ ಅನ್ನುವ ಕಂಪನಿಯಲ್ಲಿ ಕೆಲಸ ಮಾಡುವ ಅವರು ಮತ್ತು ಅವರ ಸಹೋದ್ಯೋಗಿಗಳ ಜೊತೆಯಲ್ಲಿ ನಾನೂ ಒಬ್ಬನಾಗಿ "ಹುನ್ಕಲ್ ವುಡ್" ಅನ್ನುವ ಧಾಮಕ್ಕೆ (Resort) ಹೋಗಿ ಹತ್ತಿರದಲ್ಲೇ ಇರುವ ಹುನ್ಕಲ್-ರಾಕ್ ಅನ್ನು ಹತ್ತುವುದು ನಮ್ಮ ಪೂರ್ವಯೋಜಿತ ಕಾರ್ಯಕ್ರಮವಾಗಿತ್ತು. ಅಂದಾಜು ೩೪ ಜನ ಒಟ್ಟಿಗೇ ಒಂದು ಬಸ್ಸಿನಲ್ಲಿ ಚಿಕ್ಕಮಗಳೂರಿನ ಮೂಲಕ "ಹುನ್ಕಲ್ ವುಡ್" ಧಾಮಕ್ಕೆ ಹೋಗಬೇಕಾಗಿತ್ತು. ಅಲ್ಲಿ ಉಳಿದುಕೊಳ್ಳುವುದಕ್ಕೆ ವ್ಯವಸ್ಥೆ ಅಚ್ಚುಕಟ್ಟಾಗಿದ್ದದ್ದರಿಂದ ಹರ್ಷ ಮೊದಲೇ ಅದನ್ನು ಕಾದಿರಿಸಿದ್ದರು. ಆ ೩೪ ಜನದಲ್ಲಿ ೪ ಪುಟ್ಟ ಮಕ್ಕಳೂ ಇದ್ದದ್ದು ವಿಷೇಶ.



ಪ್ರಕೃತಿಯ ಈ ಸೊಬಗನ್ನ ಸವಿಯಲು ನಾವು ನಾಡಿನ ಜನಜಂಗುಳಿಯಿಂದ, ಯಾಂತ್ರಿಕ ಬದುಕಿನಿಂದ ದೂರ ಅಂದರೆ ಚಿಕ್ಕಮಗಳೂರಿನಿಂದ ಅಂದಾಜು ೨೨ ಕಿ.ಮೀ ದೂರ ಬರಬೇಕು. ಇಲ್ಲಿಗೆ ಬಂದಾದಮೇಲೆ ಯಾವುದೇ ಮೊಬೈಲ್ ಕೆಲಸ ಮಾಡುವುದಿಲ್ಲ. ಬಿ.ಎಸ್.ಎನ್.ಎಲ್ ಬಿಟ್ಟು, ಅದು ಸಿಟಿಯ ಒಳಗಡೆ ಕೆಲಸ ಮಾಡದಿದ್ದರೂ ಇಲ್ಲಿ ಕೆಲಸ ಮಾಡುತ್ತದೆ ;)

ಇಲ್ಲಿಯೇ ವಾಸವಾಗಿರುವ ಸಹಾಯಕರು ನಮ್ಮ ಅಡುಗೆ, ತಿಂಡಿ ಮತ್ತು ಕಾಫಿಯ ವ್ಯವಸ್ಥೆ ಮಾಡಿದ್ದರು. ಇಲ್ಲಿಯ ರಾತ್ರಿಗಳನ್ನು ನೀವು ಮೇಣದಬತ್ತಿಯ ಸಹಾಯದಿಂದ ಕಳೆಯಬೇಕಾದೀತು, ಜೊತೆಯಲ್ಲಿ ಬ್ಯಾಟರಿಯನ್ನು ಕೊಂಡೊಯ್ದರೆ ಒಳಿತು. ಇಲ್ಲಿಗೆ ನೀವು ಈ ಮಾರ್ಗದಲ್ಲಿ ಬರಬಹುದು: ಬೆಂಗಳೂರು>ಚನ್ನರಾಯಪಟ್ಟಣ>ಹಾಸನ>ಬೇಲೂರು>ಚಿಕ್ಕಮಗಳೂರು>ಹೊಸಪೇಟೆ. ಅಲ್ಲಿಂದ ಅವರದೇ ಆದ ಸಾರಿಗೆ ವ್ಯವಸ್ಥೆಯಲ್ಲಿ ಹುನ್ಕಲ್ ವುಡ್ ತಲುಪಬೇಕು. ನೀವು ಕ್ರಮಿಸುವ ಅಂದಾಜು ದೂರ ೨೭೦ ಕಿ.ಮೀ. ಗಳು

ನಾವು ಬೆಂಗಳೂರನ್ನು ಶುಕ್ರವಾರ ರಾತ್ರಿ ಬಿಟ್ಟು ಶನಿವಾರ ಮುಂಜಾವದಂದು ಆ ಸ್ಥಳವನ್ನು ತಲುಪಿ, ಅಲ್ಲಿನ ಕಾರ್ಯಕ್ರಮಗಳನ್ನ ಮುಗಿಸಿ ಭಾನುವಾರ ರಾತ್ರಿ ಮರಳಿ ಬೆಂಗಳೂರಿಗೆ ಬರುವ ಯೋಜನೆಯನ್ನು ಹರ್ಷ ಮೊದಲೇ ಸಿದ್ದಪಡಿಸಿದ್ದರು.

ಪೂರ್ವನಿರ್ಧಾರಿತ ಯೋಜನೆಯಂತೆ ಖಾಸಗಿ ಬಸ್ಸನ್ನು ಬಾಡಿಗೆಗೆ ಪಡೆದುಕೊಂಡದ್ದರಿಂದ ಆಯ್ದ ಸ್ಥಳಗಳಿಂದ ನಾವೆಲ್ಲಾ ಆ ಬಸ್ಸನ್ನು ಹತ್ತಿ ರಾತ್ರಿ ಸುಮಾರು ರಾತ್ರಿ ೧೧.೩೦ ಕ್ಕೆ ಬಿಟ್ಟು ಬೆಳಗ್ಗೆ ಸುಮಾರು ೫.೩೦ ರ ಸಮಯಕ್ಕೆ ಚಿಕ್ಕಮಗಳೂರಿಗೆ ಬಂದಿದ್ದೆವು. ಬೆಂಗಳೂರಿನ ಚಳಿಗೆ ಹೋಲಿಸಿದರೆ ಅಲ್ಲಿನ ಚಳಿ ಒಂದು ಕೈ ಮೇಲೆ ಇದ್ದಂತಿತ್ತು. ರೆಸಾರ್ಟಿಗೆ ಹೋಗಲು ಇನ್ನು ಸಮಯವಿದ್ದದ್ದರಿಂದ ಅಲ್ಲೇ ಬಿಸಿ ಬಿಸಿ ಟೀ ಕುಡಿದು ನಂತರ ಮುಂದೆ ಸಾಗಿತ್ತು ನಮ್ಮ ಪಯಣ. ಆ ಚಳಿಯಲ್ಲಿ ಕೈಯಲ್ಲಿ ಬಿಸಿ ಬಿಸಿ ಟೀ ಕುಡಿಯುವ ಮಜವೇ ಬೇರೆ !!! ಗ್ರಾಹಕರಿಗೆ ಕಾದಿದ್ದ ಒಬ್ಬ ಟೋಪಿ ಮಾರುವವನಿಗೆ ನಮ್ಮ ಬಸ್ಸನ್ನು, ಬಸ್ಸಿನ ತುಂಬಾ ತುಂಬಿರುವ ಜನರನ್ನು ನೋಡಿ ಬಸ್ಸಿನಬಳಿಗೇ ತನ್ನ ಟೋಪಿ ತುಂಬಿದ ಚೀಲವನ್ನು ತಂದು ತನ್ನ ವ್ಯಾಪಾರವನ್ನು ಪ್ರಾರಂಭಿಸಿದ. ಅಲ್ಲಿಂದ ಹೊರಟ ನಮ್ಮ "ಹಂಸ" ಸುಮಾರು ೭.೦೦ ಸಮಯಕ್ಕೆ "ಹುನ್ಕಲ್ ವುಡ್" ಹತ್ತಿರದ ಮುಖ್ಯರಸ್ತೆಗೆ ಬಂದಿತ್ತು. ಅಲ್ಲಿಂದ ಅವರದೇ ಸಾರಿಗೆ ವ್ಯವಸ್ಥೆಯಲ್ಲಿ ನಾವು ಆ ಧಾಮಕ್ಕೆ ಹೋಗಬೇಕಾಗಿತ್ತು.

ಅಲ್ಲಿ ಮತ್ತೊಂದು ಚಹಾ ವಿರಾಮದ ನಂತರ ಸರಕುಸಾಗಾಣೆ ವಾಹನವೊಂದು ಅಲ್ಲಿನ ದಿನಗೂಲಿ ಕಾರ್ಮಿಕರನ್ನು ಹೊತ್ತು ಆ ಎಸ್ಟೇಟಿನ ಒಳಗೆ ಹೋಯಿತು. ಅದು ಮರಳಿ ನಮ್ಮ ಮುಂದೆ ಬಂದು ನಿಂತಾಗಲೇ ನಮಗೆ ತಿಳಿದದ್ದು, ಅದೇ ನಮ್ಮ ಮುಂದಿನ "ರಾಜಹಂಸ"ವೆಂದು. ನಾವೆಲ್ಲಾ ಅದರೊಳಗೆ (ಕುರಿಗಳು ಸಾರ್, ಕುರಿಗಳು) ಹತ್ತಿ ಯಾವ ಟೋರಾ ಟೋರಾದಲ್ಲೂ ಸಿಗದ ಮಜವನ್ನು ಅನುಭವಿಸಿ ೭.೫೦ಕ್ಕೆ ರೆಸಾರ್ಟ್ ತಲುಪಿದೆವು.

ಅಲ್ಲೇ ಸ್ವಲ್ಪ ಹೊತ್ತು ವಿಶ್ರಮಿಸಿ ತಿಂಡಿಯನ್ನು ತಿಂದು ಮಧ್ಯಾನ್ನದ ಊಟವನ್ನು ಕಟ್ಟಿಸಿಕೊಂಡು ಸುಮಾರು ೧೧.೨೦ಕ್ಕೆ ನಮ್ಮ ಚಾರಣವನ್ನು ಪ್ರಾರಂಭಿಸಿದೆವು. ಪುಟ್ಟಾಣಿ ರತನ್ ಪುಟ್ಟ ಬ್ಯಾಗ್ ಮತ್ತು ಪುಟ್ಟ ಬೈನಾಕ್ಯುಲರ್ ನೊಂದಿಗೆ ತಾನೂ ದೊಡ್ಡವರಿಗಿಂತ ಏನೂ ಕಡಿಮೆಯಿಲ್ಲವೆನ್ನುವಂತೆ ಬಂದಿದ್ದ. ಮಿಕ್ಕ ಪುಟಾಣಿಗಳು ತಮ್ಮ ಪೋಷಕರ ರಕ್ಷಣೆಯಲ್ಲಿ ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ ಮುಂದೆ ಸಾಗುತ್ತಿದ್ದರು.



ಸಾಹಸಿಗರಿಗೆ, ಚಾರಣಿಗರಿಗೆ ಹೇಳಿಮಾಡಿಸಿದ ಈ ನಿಸರ್ಗತಾಣದಲ್ಲಿ ಸಣ್ಣ ಝರಿ, ಮನಮೊಹಕ ಪರ್ವತ ಶ್ರೇಣಿ, ದಟ್ಟವಾದ ಕಾಡುಗಳನ್ನೊಳಗೊಂಡಿರುವ ಈ ತಾಣ ಮುಖ್ಯವಾಗಿ ದಿನನಿತ್ಯದ ಜಂಜಾಟದಿಂದ ನಮ್ಮನ್ನು ಬೇರೆಯದೇ ಲೋಕಕ್ಕೆ ಕೊಂಡೊಯ್ದಿತ್ತು

ಮಧ್ಯಾನ್ನ ೧೨ರ ಸಮಯದಲ್ಲಿ ನಮ್ಮ ತಂಡಕ್ಕೆ ಹಸಿರು ಹಾವಿನ ದರುಶನವಾಯಿತು. ನವೆಂಬರ್ ತಿಂಗಳಿನಲ್ಲಿ ಮಳೆ ಇರದ ಕಾರಣ ನಮಗೆ ಜಿಗಣೆಗಳ ಕಾಟ ಇರಲಿಲ್ಲ, ಹಾಗೂ ಎಲ್ಲೆಲ್ಲಿ ತೇವಾಂಶವಿರುತ್ತದೋ ಅಲ್ಲೆಲ್ಲಾ ಅವುಗಳದೇ ರಾಜ್ಯಾಭಾರ... ಕಾಫೀ ಎಸ್ಟೇಟಿನಲ್ಲಿ ಕೆಲಸಾಮಾಡುವ ಕಾರ್ಮಿಕರು ಈ ಜಿಗಣೆಗಳ ಕಾಟದಿಂದ ಪಾರಾಗಲು ಸಾಸಿವೆ ಎಣ್ಣೆಗೆ ನಷ್ಯದ ಪುಡಿಯನ್ನು ಬೆರೆಸಿ ತಮ್ಮ ಕೈ ಕಾಲುಗಳಿಗೆ ಲೇಪಿಸಿಕೊಳ್ಳುತ್ತಾರಂತೆ, ಅದು ಅಲ್ಲಿ ಕೆಲಸಮಾಡಲು ಬಂದಿದ್ದವರಿಂದ ನಮಗೆ ತಿಳಿದುಬಂದ ವಿಷಯ. ಅಲ್ಲಿಂದ ಬಳಲಿದ್ದ ತಂಡದ ಸದಸ್ಯರನ್ನು ಹುರಿದುಂಬಿಸುತ್ತಾ ನಮ್ಮ ಹೆಜ್ಜೆಗಳನ್ನು ಹುನ್ಕಲ್-ರಾಕ್ ನ ಕಡೆಗೆ ಸವೆಸುತ್ತಿದ್ದೆವು. ಮಧ್ಯಾನ್ನ ೧.೨೦ ರ ಸಮಯದಲ್ಲಿ ಊಟಮಾಡುವ ಸಲುವಾಗಿ ಒಂದು ಝರಿಯಬಳಿ ತಂಗಿದ್ದೆವು, ಅಲ್ಲಿ ನಮಗೆ ಜಿಗಣೆ, ಮತ್ತು ಪಿಟ್ ವೈಪರ್ ಗಳು ಕಾಣಿಸಿದವು. ಈ ವೈಪರ್ ಅನ್ನುವ ಉರಗ ಪ್ರಭೇದ ಅತ್ಯಂತ ವಿಷಕಾರಿ. ನಮಗೆ ಕಂಡಿದ್ದು ಆಕಾರದಲ್ಲಿ ಪುಟ್ಟ ಮರಿಯಂತಿದ್ದರೂ ಅದರ ವಿಷ ಮಾರಣಾಂತಿಕವೇ. ಎಲ್ಲರ ಕ್ಯಾಮರಾ ಕಣ್ಣು ಆ ವೈಪರಿನತ್ತ ಹೊರಳಿತು.... ಕ್ಯಾಮರಾಗಳು ಮಾತನಾಡತೊಡಗಿದವು, ಕ್ಲಿಕ್.... ಕ್ಲಿಕ್... ಕ್ಲಿಕ್.... ಆ ವೈಪರ್ ತನ್ನ ಸುರುಳಿ ಸುತ್ತಿದ ಮೈಯನ್ನು ಛಾಯಾಗ್ರಾಹಕರಿಗೆ ಪ್ರದರ್ಶಿಸುತ್ತಾ ತನ್ನ ಬಳಿ ಬರಬೇಡಿರೆಂದು ಎಚ್ಚರಿಕೆ ನೀಡುತ್ತಿತ್ತು. ಅಲ್ಲಿಂದ ಸ್ವಲ್ಪ ಮುಂದೆ ಬಂದಂತೆ ಹಾವಿಗಿಂತಾ ನಾನೇನು ಕಮ್ಮಿ ಎನ್ನುವಂತೆ ಮತ್ತೊಂದು ಕೀಟ ತನ್ನ ಹೊಳಪಿನ ಮೈಮಾಟ ಪ್ರದರ್ಶಿಸಿತು.




ಚಾರಣಿಗರೆಲ್ಲಾ ಉತ್ಸಾಹದಿಂದ ಆ ಹೆಬ್ಬಂಡೆಯಕಡೆಗೆ ಹೆಜ್ಜೆ ಹಾಕುತ್ತಿದ್ದರೆ ಮಿಕ್ಕವರು ಸುಸ್ತಾಗಿ ಹಿಂದೆ ಉಳಿದಿದ್ದೆವು. ಕಡಿದಾದ ಹುಲ್ಲುತುಂಬಿದ ಆ ಪರ್ವತವನ್ನು ಹತ್ತಲು ಅನುಭವ ಬೇಕೇ ಬೇಕು. ನಮ್ಮೊಂದಿಗೆ ಬಂದಿದ್ದ ಗೈಡ್ ನಮ್ಮಿಂದ ದೂರ ಹೋಗಿದ್ದರಿಂದ ನಮ್ಮ ಮತ್ತು ಅವರ ನಡುವಣ ಸಂಪರ್ಕ ಇರಲಿಲ್ಲ. ಹಾಗಾಗಿ ನಾವು ಹಿಂದುಳಿಯಬೇಕಾಯಿತು. ನಾವೆಲ್ಲಾ ಅಲ್ಲೇ ಕುಳಿತು ನಿಸರ್ಗದ ಸೊಬಗನ್ನು ಸವಿಯುತ್ತಲಿದ್ದರೆ ಮೇಲಿನ ತಂಡ ಆ ಹೆಬ್ಬಂಡೆಯನ್ನು ತಲುಪಲೇ ಬೇಕೆಂದು ತನ್ನ ಚಾರಣವನ್ನು ಮುಂದುವರಿಸಿತ್ತು. ಮುಂದಿನ ದಾರಿ ಕಡಿದಾದ್ದರಿಂದ ನಮ್ಮ ವಿಭಜಿತ ತಂಡ ಸುಮಾರು ೩.೦೦ ಘಂಟೆಯ ಸಮಯದಲ್ಲಿ ಮರಳಿ ರೆಸಾರ್ಟಿಗೆ ಹೋಗುವ ನಿರ್ಧಾರಕ್ಕೆ ಬಂದೆವು. ಹತ್ತುವಾಗ ನಿಂತು ಹತ್ತಿದ್ದ ತಂಡದ ಸದಸ್ಯರು ಇಳಿಯುವಾಗ ಪುಟ್ಟ ಮಕ್ಕಳು ಜಾರುಬಂಡೆಯಲ್ಲಿ ಜಾರಿದಂತೆ ಜಾರಿಕೊಂಡು ಇಳಿಯುತ್ತಿದ್ದರು. ಚಾರಣವನ್ನು ಮುಗಿಸಿ ಮರಳಿ ರೆಸಾರ್ಟಿಗೆ ಬಂದಾಗ ಸಂಜೆ ೬.೩೦ರ ಸಮಯ.

ಅಲ್ಲಿಂದ ಬಂದು ಸ್ವಲ್ಪ ಸುಧಾರಿಸಿಕೊಂಡಮೇಲೆ ಕರೆಂಟ್ ಇಲ್ಲದ ಕಾರಣ ನನ್ನ ಕ್ಯಾಮರದ ಬ್ಯಾಟರಿಯನ್ನು ಚಾರ್ಜ್ ಮಾಡಿಕೊಳ್ಳಲಾಗಲಿಲ್ಲ. ಸಂಜೆಯಹೊತ್ತಿಗೆ ಬಿಸಿ ಬಿಸಿ ಮೆಣಸಿನಕಾಯಿ ಭಜ್ಜಿ, ಮತ್ತೆ ಕಾಪಿ ಬಂದಿತು. ಬೆಂಗಳೂರಿನಲ್ಲಿ ಬಹಳ ಕಡಿಮೆ ಕಾಫಿ ಕುಡಿಯುವ ನಾನು ಅಲ್ಲಿ ಅವರು ಕೊಟ್ಟಾಗಲೆಲ್ಲ ಬೇಡ ಎನ್ನದೇ ಕುಡಿಯುತ್ತಿದ್ದೆ, ಅಲ್ಲಿಯ ಚಳಿಗೆ ಅದು ಅತ್ಯವಶ್ಯಕ. ರಾತ್ರಿ Camp fireಹಾಕಿಕೊಂಡು ಅದರಲ್ಲಿಯ ಬಿಸಿಗೆ ಮೈಒಡ್ಡಿ ಕುಳಿತು ನಮಗೆ ತಿಳಿದಿರುವ ಹಾಡುಗಳನ್ನ ನಮ್ಮದೇ ರೀತಿಯಲ್ಲಿ ಹಾಡಿ, ಮಲಗುವ ಮುಂಚೆ ಮಲ್ಲಿ ಅವರಿಂದ "ಪಾಚೊ ನಾ ಆಯೋ" ಕಥೆಯನ್ನು ಕೇಳಿ ನಂತರ ಎಲ್ಲಾ ತಮ್ಮ ತಮ್ಮ ಕನಸಿನಲೋಕಕ್ಕೆ ಹೊರಳಿದರು.


ಬೆಳಿಗ್ಗೆ ಮನೋಹರ ಕತ್ತಿಗೆ ತನ್ನ ಕ್ಯಾಮರವನ್ನ ತೂಗುಹಾಕಿಕೊಂಡು ಪಕ್ಷಿವೀಕ್ಷಣೆಗೆ ಹೊರಟ. ಅಲ್ಲಿ ನಮಗೆ "ಬೀ ಈಟರ್" "ವ್ಯಾಗ್ ಟೈಲ್" "ಬುಲ್ ಬುಲ್" ಇವೇ ಮೊದಲಾದ ಪಕ್ಷಿಗಳನ್ನು ನೋಡುವ ಅವಕಾಶ ದೊರಕಿತು. ಬೆಳಗಿನ ತಿಂಡಿ ಮುಗಿಸಿ ಅದೇ ಬಂಗಲೆಯ ಹತ್ತಿರದಲ್ಲಿದ್ದ ಒಂದು ಸಣ್ಣ ಝರಿಯನ್ನು ನೋಡಲು ನಮ್ಮತಂಡ ಹೊರಟಿತು. ಸಾಮಾನ್ಯವಾಗಿ ನಮ್ಮಲ್ಲಿ ಕಾಣಸಿಗುವ Dragan flyನ ಮತ್ತೊಂದು ಪ್ರಭೇಧ ನಮ್ಮನ್ನು ಚಕಿತಗೊಳಿಸಿತು. ಸಾಮಾನ್ಯ ಚಿಟ್ಟೆಯಂತೆ ಹಾರುತ್ತಿದ್ದ ಆ ಚಿಟ್ಟೆ ಹೋಲಿಕೆಯಲ್ಲಿ Dragan flyನಂತಿತ್ತು. ಸಾಮಾನ್ಯವಾಗಿ Dragan flyಗಳು ಕುಳಿತಾಗ ತಮ್ಮ ರೆಕ್ಕೆಯನ್ನು ಅಗಲವಾಗಿ ಹರಡಿ ಕೂರುತ್ತವೆ, ಆದರೆ ಈ Dragan flyಪ್ರಭೇಧ ತನ್ನ ರೆಕ್ಕೆಯನ್ನು ಮಡಚಿ ಕೂರುತ್ತಿತ್ತು.



ಆ ಸೊಬಗನ್ನು ಸವಿಯುತ್ತಾ ನಂತರ ಅಲ್ಲಿಂದ ನಮ್ಮ ತಾಣಕ್ಕೆ ಮರಳಿ ಬಂದೆವು. ಅಲ್ಲಿ ಊಟಮಾಡಿಕೊಂಡು ಮತ್ತದೇ "ರಾಜಹಂಸ" ದಲ್ಲಿ ಮುಖ್ಯರಸ್ತೆಗೆ ಬಂದು ನಮಗಾಗಿ ಕಾದು ಕುಳಿತಿದ್ದ "ಹಂಸ"ವನ್ನೇರಿ ಬೆಂಗಳೂರಿನ ಕಡೆಗೆ ಪಯಣ ಬೆಳೆಸಿದೆವು. ಪಯಣದ್ದ ಪ್ರಾರಂಭದಲ್ಲಿ ನಮ್ಮ ಹಂಸದಲ್ಲಿ Sansui ಚಿತ್ರ ಪ್ರದರ್ಶನವಾಯಿತು. ನಂತರ ಹಿಂದಿನ ಸಾಲುಗಳಲ್ಲಿ ಕುಳಿತಿದ್ದ ನಮ್ಮ ಮಧುರ !!!! ಕಂಠದಿಂದ ಸುಶ್ರಾವ್ಯ ಗಾನಸಿರಿ ಶುರುವಾಗಿ ಅದು ಬೆಂಗಳೂರಿನ ತನಕ ಮುಂದುವರಿದಿತ್ತು. ೨ ದಿನಗಳಿಂದ ಜೊತೆಯಲ್ಲಿದ್ದ ತಂಡದ ಸದಸ್ಯರು ತಮ್ಮ ತಮ್ಮ ಗೂಡು ಸೇರುವ ತವಕದಲ್ಲಿದ್ದರು.